ನಮ್ಮ ದಾವಣಗೆರೆ, ಡಿ.30 :- ಜಿಲ್ಲೆಯಲ್ಲಿ ಹೊಸ ಮತದಾರರ ನೋಂದಣಿ ಹಾಗೂ ಎಲ್ಲ ನೋಂದಾಯಿತ ಅರ್ಹ ಮತದಾರರಿಗೆ ಗುರುತಿನ ಚೀಟಿ ಪಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರು ತಿಳಿಸಿದರು.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಸ್ವೀಪ್ ಕಾರ್ಯಚಟುವಟಿಕೆ ಮತ್ತು ಮತದಾರರ ಸಾಕ್ಷರತಾ ಸಂಘಗಳ ಚಟುವಟಿಕೆ ಕುರಿತಂತೆ ಪರಿಶೀಲನೆ ನಡೆಸಿದ ಅವರು, 2023ಕ್ಕೆ ಹೊಸ ಮತದಾರರ ನೋಂದಣಿ ಸಂಖ್ಯೆ ಹೆಚ್ಚಳವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎ.ಚನ್ನಪ್ಪ ರಾಷ್ಟ್ರೀಯ ಮತದಾರ ದಿನಾಚರಣೆ ಪ್ರಯುಕ್ತ ನಡೆಸಿದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರ, ವಿಶೇಷ ಚೇತನ ಮತದಾರರ ಮಾಹಿತಿ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳ ಮಾಹಿತಿ, ಲಿಂಗತ್ವ ಅಲ್ಪಸಂಖ್ಯಾತರ ಮಾಹಿತಿ, ಮಾಜಿ ದೇವದಾಸಿ ಮಹಿಳೆಯರ ಮಾಹಿತಿ, ದಮನಿತ ಮಹಿಳೆಯರ ಮತ್ತು ಸ್ವೀಪ್ ಕಾರ್ಯಕ್ರಮಗಳಡಿ ಆಯೋಜಿಸಿದ ಚಟುವಟಿಕೆಗಳನ್ನು ಸಭೆಗೆ ವಿವರಿಸಿದರು.
ಇ.ಎಲ್.ಸಿ ಮೂಲಕ ಶಾಲಾ/ಕಾಲೇಜುಗಳಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರಕಲಾ ಸ್ಪರ್ಧೆ, ಚರ್ಚಾಸ್ಪರ್ಧೆ, ಸಾಂಸ್ಕøತಿಕ ಕಾರ್ಯಕ್ರಮಗಳು, ಆಶುಭಾಷಣ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಇನ್ನಿತರೆ ಸ್ಪರ್ದೆಗಳನ್ನು ಮತ್ತು ಸೆಮಿನಾರ್ ಕಾರ್ಯಕ್ರಮಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಲಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಸ್ತ್ರೀ ಶಕ್ತಿ ಸಂಘಗಳ ಮತದಾರರಿಗೆ ಅರಿವು ಮೂಡಿಸುವ ಸಲುವಾಗಿ ವಿಶೇಷ ಶಿಬಿರಗಳನ್ನು ಹಮ್ಮಿಕೊಂಡು ಅಂಗನವಾಡಿ ಕಾರ್ಯಕರ್ತೆಯರ ನೇತೃತ್ವದಲ್ಲಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗರಾಜ್, ಜಿಲ್ಲಾ ಶಿಕ್ಷಣ ಅಧಿಕಾರಿ ತಿಪ್ಪೇಶಪ್ಪ ಒಳಗೊಂಡಂತೆ ಸ್ವೀಪ್ ಸಮಿತಿಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.